ಲೊಕಾಯುಕ್ತ ದಾಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ – Vishwanews24
ಲೊಕಾಯುಕ್ತ ದಾಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ
ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿಯಲ್ಲಿ ನಿನ್ನೆ ಮಾರ್ಚ್ 2 ಗುರುವಾರ ಸಾಯಂಕಾಲದಿಂದ ಇಂದು ಶುಕ್ರವಾರ ಬೆಳಗಿನ ಜಾವದವರೆಗೂ ಲೋಕಾಯುಕ್ತ ದಾಳಿ ಮುಂದುವರಿದಿದ್ದು ಈ ವೇಳೆ ರಾಶಿ ರಾಶಿ ಹಣ ಪತ್ತೆಯಾಗಿದೆ.

ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಮಾಡಾಳು ಪ್ರಶಾಂತ್ ಅವರ ಕಚೇರಿಯಲ್ಲಿ ನಿನ್ನೆ ಸಂಜೆ 6.30ಕ್ಕೆ ಪ್ರಶಾಂತ್ ಅವರು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ಬಳಿಕ ಕಚೇರಿಯಲ್ಲಿ ಮತ್ತು ಅವರ ಮನೆಯಲ್ಲಿ ಶೋಧ ಕಾರ್ಯ ಮುಂದುವರಿಯಿತು. ಅದು ಇಂದು ಬೆಳಗಿನ ಜಾವದವರೆಗೂ ಮುಂದುವರಿದಿತ್ತು. ಈ ವೇಳೆ ಸಮಗ್ರವಾಗಿ ಶೋಧ ನಡೆಸಿದಾಗ ಅವರ ಕಚೇರಿಯಲ್ಲಿ ದಾಖಲೆ ಹಾಗೂ ಸುಮಾರು 6 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು ಲೋಕಾಯುಕ್ತ ಸಿಬ್ಬಂದಿಯನ್ನು ದಂಗುಬಡಿಸಿದೆ.

ಇಂದು ಲೋಕಾಯುಕ್ತ ನ್ಯಾಯಾಲಯ ಮುಂದೆ ಹಾಜರು: ಲಂಚ ಸ್ವೀಕರಿಸಿದ ಮತ್ತು ನೀಡಿದ ಆರೋಪದ ಮೇಲೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನು ಬಂಧಿಸಲಾಗಿದೆ. ಪ್ರಶಾಂತ್ ಮಾಡಾಳ್ ಅವರ ಸಂಬಂಧಿ ಸಿದ್ದೇಶ್, ಬಿಡಬ್ಲ್ಯುಎಸ್ ಎಸ್ ಬಿಯ ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಇಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ಐವರನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.
ಉಡುಪಿ: ಬೇನಾಮಿ ಆಸ್ತಿ ಆರೋಪ : ಕಾರ್ಕಳ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್ – Vishwanews24
