ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ವರ್ಗಾವಣೆ : ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್ ನೂತನ ಕಮೀಷನರ್ ಆಗಿ ನೇಮಕ -Vishwanews24
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಪ್ರಸ್ತುತ ಕಮಿಷನರ್ ಆಗಿರುವ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ವರ್ಗ ಮಾಡಲಾಗಿದೆ.
ನೂತನ ಕಮಿಷನರ್ ಆಗಿರುವ ಡಾ. ಸುಬ್ರಹ್ಮಣ್ಯೇಶ್ವರ ರಾವ್ 2002ನೇ ಬ್ಯಾಚ್ನವರಾಗಿದ್ದಾರೆ. ಇವರು ಪುತ್ತೂರು ಉಪವಿಭಾಗದ ಎಎಸ್ಪಿಯಾಗಿ, ಕೊಡಗು, ಉಡುಪಿ, ಬೀದರ್ ಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ (2009-11), ಆಂತರಿಕ ಭದ್ರತಾ ವಿಭಾಗದ ಎಸ್ಪಿ, ಸಿಬಿಐ ಘಟಕದ ಎಸ್ಪಿ, ಮೈಸೂರು ಪೊಲೀಸ್ ಆಯುಕ್ತ, ಇಂಟೆಲಿಜೆನ್ಸ್ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮೂಲತಃ ಆಂಧ್ರದವರಾಗಿರುವ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭ ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇದು ಮಾತ್ರವಲ್ಲದೆ ಮೈಸೂರಿನಲ್ಲಿ ಪೊಲೀಸ್ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸಿದ ಸಂದರ್ಭ ರೌಡಿಗಳ ಹೆಡೆಮುರಿ ಕಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡಲು ದಿಟ್ಟ ಕ್ರಮಕೈಗೊಂಡಿದ್ದರು.
