ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ -vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ

ಮಂಗಳೂರು : ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ಮೋಸ್ಟ್‌ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಎನ್‌ಐಎ ಮಾಹಿತಿ ಪ್ರಕಾರ, ಉಮ್ಮರ್ ಫಾರೂಕ್ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ ರೂ. 4 ಲಕ್ಷ ಬಹುಮಾನವನ್ನೂ ಘೋಷಿಸಲಾಗಿತ್ತು.

ತನಿಖೆ ಪ್ರಕಾರ, ಉಮ್ಮರ್ ಫಾರೂಕ್ ನಿಷೇಧಿತ ಪಿಎಫ್‌ಐ ಸಂಘಟನೆಯ ಕಚೇರಿಯಲ್ಲಿ ನಡೆದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಅಲ್ಲದೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಬಳಸಲಾದ ಆರೋಪಿಗಳಿಗೆ ಬೈಕ್ ಒದಗಿಸಿದ್ದ ಆರೋಪವೂ ಆತನ ಮೇಲಿದೆ. ಹತ್ಯೆ ಬಳಿಕ ಪ್ರಮುಖ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿರುವುದು ಹಾಗೂ ಪ್ರಕರಣದ ಸಾಕ್ಷಿದಾರನ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲೂ ಭಾಗಿಯಾಗಿರುವ ಆರೋಪವನ್ನು ಎನ್‌ಐಎ ತನಿಖೆ ಉಲ್ಲೇಖಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಉಮ್ಮರ್ ಫಾರೂಕ್ ಕೇರಳದ ಕೊಚ್ಚಿಗೆ ಪರಾರಿಯಾಗಿದ್ದನು. ನಿಷೇಧಿತ ಪಿಎಫ್‌ಐ ಸಂಘಟನೆಯ ಕೆಲ ಪ್ರಮುಖರ ನೆರವಿನಿಂದ ಕಳೆದ ನಾಲ್ಕು ವರ್ಷಗಳಿಂದ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

ಕಳೆದ ಜುಲೈ 11ರಂದು ಎನ್‌ಐಎ ನೌಷಾದ್ ಮತ್ತು ನಸೀರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿತ್ತು. ಅವರ ವಿಚಾರಣೆಯ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ಕೊಚ್ಚಿಯಲ್ಲಿನ ಅಡಗುತಾಣವನ್ನು ಪತ್ತೆಹಚ್ಚಿದ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಉಮ್ಮರ್ ಫಾರೂಕ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

Leave a Reply