ಮಂಗಳೂರು :ಪ್ಲಾಸ್ಟಿಕ್‌ ನಿಷೇಧ ಉಲ್ಲಂಘಿಸಿದರೆ ಉದ್ದಿಮೆ ಪರವಾಣಿಗೆ ರದ್ದು : ಮಹಾನಗರ ಪಾಲಿಕೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು,: ಪ್ಲಾಸ್ಟಿಕ್‌ ನಿಷೇಧ ಉಲ್ಲಂಘಿಸಿದರೆ ಉದ್ದಿಮೆ ಪರವಾಣಿಗೆ ರದ್ದು ಮಾಡಲಾಗುತ್ತದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಪ್ಲಾಸ್ಟಿಕ್‌ ಭಿತ್ತಿಪತ್ರ, ಪ್ಲಾಸ್ಟಿಕ್‌ ತೋರಣ, ಫ್ಲೆಕ್ಸ್‌, ಬಾವುಟ, ಪ್ಲಾಸ್ಟಿಕ್‌ ತಟ್ಟೆ, ಪ್ಲಾಸ್ಟಿಕ್‌ ಲೋಟ, ಪ್ಲಾಸ್ಟಿಕ್‌ ಚಮಚ, ಕ್ಲಿಂಗ್‌ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್‌ ಹಾಳೆ ಹಾಗೂ ಥರ್ಮೊಕೋಲ್‌ ಮತ್ತು ಪ್ಲಾಸ್ಟಿಕ್‌ ಮೈಕ್ರೋ ಬೀಡ್ಸ್‌ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಉದ್ದಿಮೆದಾರರು, ವ್ಯಾಪಾರಸ್ಥರು, ರಸ್ತೆ ಬದಿ ವ್ಯಾಪಾರಸ್ಥರು ನಿಷೇಧಿಸಿರುವ ಪ್ಲಾಸ್ಟಿಕ್‌ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್‌ ಚೀಲದಲ್ಲಿ ಸಾಮಗ್ರಿ ವಿತರಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಅಂತಹ ವ್ಯಾಪಾರಸ್ಥರ ಉದ್ದಿಮೆ ಮೇಲೆ ದಾಳಿ ನಡೆಸಿ ನಿಷೇಧಿಸಿದ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿ ದಂಡ ವಿಧಿಸಲಾಗಿದ್ದರೂ, ಅನೇಕ ಅಂಗಡಿ, ವ್ಯಾಪಾರ ಉದ್ದಿಮೆಗಳಲ್ಲಿ ಬಳಕೆ ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್‌ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವ ಉದ್ದಿಮೆದಾರರು ಬಳಕೆ ಮತ್ತು ಮಾರಾಟ ಮಾಡುವುದು ಪರಿಶೀಲನೆ ಸಮಯದಲ್ಲಿ ಕಂಡುಬಂದಲ್ಲಿ ಯಾವುದೇ ಮುನ್ಸೂಚನೆ ನೀಡದೆ, ಎಲ್ಲಾ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು, ಒಂದು ಸಾವಿರ ರೂ.ನಿಂದ 10 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಈ ನಿರ್ದೇಶನ ಉಲ್ಲಂಘಿಸಿದ ಕಾರಣ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯಿದೆ, 1986ರ ಸೆಕ್ಷನ್‌ 19ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಹಾಗೂ ಉದ್ದಿಮೆ ಪರವಾನಿಗೆ ರದ್ದುಗೊಳಿಸುವ ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.