ಮಿಥುನ್ ರೈ ಕೈತಪ್ಪಿದ ಟಿಕೆಟ್: ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Featured, ದಕ್ಷಿಣ ಕನ್ನಡ

ಮಂಗಳೂರು,: ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

ಮಂಗಳೂರಿನ ಹೋಟೆಲ್‌ವೊಂದರಲ್ಲಿ  ಮಾತನಾಡಿದ ಯುವ ಕಾಂಗ್ರೆಸ್‌ನ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಗುಡ್ಡೆಗುತ್ಲು, ಮೂರು ವರ್ಷಗಳಿಂದ ಹಿಂದೆ ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಪ್ರಸ್ತಾಪವಾಗಿತ್ತು. ಅದರಂತೆ ಟೆಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈ ಕಳೆದ ಮೂರು ವರ್ಷಗಳಿಂದ ಮುಲ್ಕಿಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪುವ ಮೂಲಕ ಅವರಿಗೆ ಅನ್ಯಾಯವಾಗಿದೆ. ಇದನ್ನು ಪ್ರತಿಭಟಿಸಿ ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದರು.

ಸದ್ಯ ಮಿಥುನ್ ರೈಯವರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ಆದ್ದರಿಂದ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸುವವರೆಗೆ ತಟಸ್ಥ ನೀತಿ ಅನುಸರಿಸಲು ನಿರ್ಧರಿಸಿದ್ದೇವೆ ಎಂದು ಕಿರಣ್ ಕುಮಾರ್ ತಿಳಿಸಿದರು.

ಯುವ ಕಾಂಗ್ರೆಸ್ ಮುಖಂಡರಾದ ಸುಹೈಲ್ ಕಂದಕ್, ಮೆಲ್ವಿನ್ ರೇಗೊ, ಗಿರೀಶ್ ಆಳ್ವ, ಮುಹಮ್ಮದ್ ತೌಸೀಫ್, ಅಭಿನಂದನ್, ಪ್ರಶಾಂತ್ ಕುಲಾಲ್, ಸಿದ್ದೀಕ್, ಪ್ರಸಾದ್ ಮಲ್ಲಿ, ವರುಣ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.