ಮುಂದಿನ ಚುನಾವಣೆಯಲ್ಲಿ ಬಹುಮತ ನೀಡಿದರೆ ರಾಜ್ಯವನ್ನು ನಂಬರ್ ಒನ್ ಮಾಡುತ್ತೇನೆ, ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿ ಕೆ
ಬೆಂಗಳೂರು: ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಜೆಡಿಎಸ್ ಪಕ್ಷಕ್ಕೆ ಆಡಳಿತ ನಡೆಸಲು ಸ್ವಂತ ಶಕ್ತಿ ಕೊಡಬೇಕು. ಬಹುಮತ ನೀಡಿದರೆ ದೇಶದಲ್ಲಿಯೇ ರಾಜ್ಯವನ್ನು ನಂಬರ್ ಒನ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜೆಡಿಎಸ್ ಪಕ್ಷದ ಕಚೇರಿಗೆ ಬೀಗ ಹಾಕಿ ಕಟ್ಟಡವನ್ನು ನೆಲಸಮ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಕುರಿತಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಎಲ್ಲಾ ಟೀಕೆಗೆ ಉತ್ತರ ಕೊಡಲು ಮುಂದಾಗಿದ್ದು ಫೆಬ್ರವರಿ 8ರಂದು ಮಂಡಿಸಲಿರುವ ಬಜೆಟ್ ನಲ್ಲಿ ಬ್ಯಾಂಕುಗಳಿಗೆ ಪಾವತಿಸಬೇಕಾದ ಸಾಲದ ಮೊತ್ತವನ್ನು ನಾಲ್ಕು ಕಂತುಗಳ ಬದಲಾಗಿ ಒಂದೇ ಕಂತಿನಲ್ಲಿ ಪಾವತಿಸುವ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಫೆ.8ರಂದು ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್ ಘೋಷಣೆ ವೇಳೆ ಸಾಲಮನ್ನಾ ಯೋಜನೆಯ ಸಂಪೂರ್ಣ ಮೊತ್ತ 46 ಸಾವಿರ ಕೋಟಿ ರು.ಗಳನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು. ರೈತರಲ್ಲಿ ಅವಿಶ್ವಾಸ ಮೂಡಿಸುವ ಪ್ರತಿಪಕ್ಷಗಳ ಹುನ್ನಾರಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು..
