ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು : ಸಿದ್ದರಾಮಯ್ಯ – Vishwanews24
ರಾಜ್ಯದಲ್ಲಿ ಹಿಜಾಬ್ ವಿವಾದ ಹುಟ್ಟುಹಾಕಿದ್ದೇ ಬಿಜೆಪಿಯವರು..
ಎರಡೂ ಧರ್ಮದವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು..
ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಲ್ವಾ?
ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ಹೇರುತ್ತಿರುವುದು ಅಮಾನವೀಯ..
ಮೈಸೂರು: ‘ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕಲ್ವಾ? ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಕಲ್ವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಲ್ವಾ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕ್ಕೊಳ್ಲಿ ಬಿಡಿ. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ?’ ಎಂದರು.
‘ರಾಜ್ಯದಲ್ಲಿ ಹಿಜಾಬ್ ವಿವಾದ ಹುಟ್ಟುಹಾಕಿದ್ದೇ ಬಿಜೆಪಿಯವರು. ಎರಡೂ ಧರ್ಮದವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು. ಆದರೆ ಉದ್ದೇಶಪೂರ್ವಕವಾಗಿ ದೊಡ್ಡದಾಗಿಸಿದ್ದಾರೆ’ ಎಂದು ದೂರಿದರು.
ಅಮಾನವೀಯ: ‘ಜಾತ್ರೆಗಳಲ್ಲಿ ಯಾರು ಬೇಕಾದರೂ ವ್ಯಾಪಾರ ಮಾಡಬಹುದು. ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ಹೇರುತ್ತಿರುವುದು ಅಮಾನವೀಯ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮುಸ್ಲಿಂ ವರ್ತಕರನ್ನು ಬಹಿಷ್ಕರಿಸುವಂತೆ ಬಿಜೆಪಿಯವರೇ ವಿವಿಧ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
