ರಾಜ್ಯದಲ್ಲಿ ಕೈಗಾರಿಕಾಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಲು ರಾಜ್ಯ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ : ಮುಖ್ಯಮಂತ್ರಿ -Vishwanews24
ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಲು ರಾಜ್ಯ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಿದರು. ನಂತರ ಮಾತಾನಾಡಿದ ಅವರು, ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳ ಅಭಿವೃದ್ದಿಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಸರಕು ಕ್ಷೇತ್ರ, ಉದ್ಯಮ, ಕೈಗಾರಿಕೆ ಹಾಗೂ ಐಟಿ ಬಿಟಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿಶಿಷ್ಠ ಹೆಸರನ್ನು ಪಡೆದುಕೊಂಡಿರುವ ನಗರ ಬೆಂಗಳೂರು. ಈ ನಗರದಿಂದಲೇ ಚಂದ್ರಯಾನ ನಿರ್ವಹಣೆಯನ್ನು ಮಾಡಲಾಗುತ್ತಿರುವುದು ಬಹಳ ಸಂತಸದ ವಿಷಯ ಎಂದು ಹೇಳೀದರು.
ದೇಶದ ಆರ್ಥಿಕತೆಯ ಅಭಿವೃದ್ದಿಗೆ ಕೈಗಾರಿಕಾ ಕ್ಷೇತ್ರದ ಕೊಡುಗೆ ಅಪಾರ. ಕೈಗಾರಿಕಾ ನೀತಿಯನ್ನು ರೂಪಿಸಿದ ಮೊದಲ ರಾಜ್ಯ ನಮ್ಮದು ಎನ್ನುವ ಹೆಗ್ಗಳಿಕೆಯೂ ಇದೆ. ಕೈಗಾರಿಕಾ ನೀತಿಯಲ್ಲಿ ಆಗಬೇಕಾಗಿರುವ ಅನೇಕ ಅಂಶಗಳನ್ನು ಗಣನೆಗೆ ತಗೆದುಕೊಂಡು, ಕೈಗಾರಿಕಾ ಸಂಸ್ಥೆಗಳು ಹಾಗೂ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಹೊಸ ಕೈಗಾರಿಕಾ ನೀತಿ 2019 ನ್ನು ಶೀಘ್ರದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯತತ್ಪರವಾಗಿದೆ ಎಂದು ಹೇಳಿದರು.
ಈಗಾಗಲೇ ಕೈಮಗ್ಗ ನೇಕಾರರ ಸಾಲವನ್ನು ಮನ್ನಾ ಮಾಡಿದ್ದೇವೆ. ಈ ಕ್ಷೇತ್ರಕ್ಕೆ ಹೆಚ್ಚಿನ ಬಲ ನೀಡುವ ನಿಟ್ಟಿನಲ್ಲಿ ಹೊಸ ಜವಳೀ ನೀತಿಯನ್ನೂ ಜಾರಿಗೊಳಿಸಲಾಗುತ್ತಿದೆ. ಮುಂದಿನ 15 – 20 ದಿನಗಳಲ್ಲಿ ಕಲಬುರ್ಗಿ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿಗಳಾದ ನರೇಂದ್ರ ಮೋದಿ ಯವರು ಉದ್ಘಾಟಿಸಲಿದ್ದಾರೆ. ಕೈಗಾರಿಕೆಗಳಿಗೆ ಹಾಗೂ ಕೈಗಾರಿಕೋದ್ಯಮಿಗಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
