ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಹೊಸ ತಂತ್ರ :ರಾಜ್ಯದ ಪ್ರಬಲ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ಹೆಚ್ಚಿನ ಅಧಿಕಾರ ನೀಡಲು ಚಿಂತನೆ
ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಬೇರೆ ರೀತಿಯ ತಂತ್ರಗಾರಿಕೆ ಪ್ರಯೋಗಿಸಲು ನಿರ್ಧರಿಸಿದೆ. ರಾಜ್ಯದ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಚುನಾವಣೆಯ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ವೇಗಕ್ಕೆ ಅಂಕುಶ ಹಾಕಿತ್ತು. ಹೀಗಾಗಿ ಬಿಜೆಪಿ ಗೆಲುವಿನ ಸನಿಹದಲ್ಲಿ ಮುಗ್ಗರಿಸಿತ್ತು. ಇದರಿಂದ ಪಾಠ ಕಲಿತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ತನ್ನ ಹಳೆಯ ತಂತ್ರಗಾರಿಕೆಗಳನ್ನು ಬದಿಗಿಟ್ಟು, ಚುನಾವಣೆಯ ಉಸ್ತುವಾರಿಯನ್ನು ಬಿಎಸ್ವೈ ವಹಿಸಲು ನಿರ್ಧರಿಸಿದೆ.
20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್, ಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ, ಪ್ರಚಾರ ತಂತ್ರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಯಡಿಯೂರಪ್ಪ ಅವರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿರುವುದಾಗಿ ಗೊತ್ತಾಗಿದೆ.
ಹೀಗಾಗಿಯೇ ಅಧಿಕ ಸ್ಥಾನಗಳಲ್ಲಿ ಗೆದ್ದು ರಾಜ್ಯದಲ್ಲಿ ತಮ್ಮ ವರ್ಚಸ್ಸು ಕುಂದಿಲ್ಲ ಎಂದು ಸಾಬೀತುಪಡಿಸಲು ಯಡಿಯೂರಪ್ಪ ಅವರೂ ಕೂಡ ಉತ್ಸುಕರಾಗಿದ್ದಾರೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿರುವ ಅವರು ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ.
