ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ : ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು: ಯಡಿಯೂರಪ್ಪ ಭರವಸೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ‘ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಡಿಸೆಂಬರ್‌ 30ರಂದು ನಟ ವಿಷ್ಣುವರ್ಧನ್‌ ಅವರ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ನಟಿ ಭಾರತಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣದ ಕುರಿತು ಚರ್ಚಿಸಿದರು.

ಅವರು ಇಂದು ಬೆಳಗ್ಗೆ ಸಿಎಂ ಬಿಎಸ್‌ವೈ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇನ್ನು ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಈಗಾಗಲೇ ಸ್ಮಾರಕ ಕಾರ್ಯ ಮೈಸೂರಿನಲ್ಲಿ ನಡೆಯುತ್ತಿದೆ‌.‌ ಯಡಿಯೂರಪ್ಪ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ‌. ವಿಷ್ಣುವರ್ಧನ್ ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಅವರು ವಿಷ್ಣುವರ್ಧನ್ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಅಂತ ಹೇಳಿದರು.

ಸ್ಮಾರಕ ನಿರ್ಮಾಣ ಎಲ್ಲಿ ಮಾಡಬೇಕು ಎಂದೇ ಅನೇಕ ವರ್ಷಗಳ ವರೆಗೆ ವಿವಾದ ಉಂಟಾಗಿತ್ತು. ವಿಷ್ಣುವರ್ಧನ್‌ ಅವರ ಸಮಾಧಿ ಇರುವ ಅಭಿಮಾನ್‌ ಸ್ಟುಡಿಯೋದ ಜಾಗದಲ್ಲಿಯೇ ವಿಷ್ಣುವರ್ಧನ್‌ ಸಮಾಧಿ ನಿರ್ಮಿಸಬೇಕು ಎಂಬ ಎಲ್ಲರ ಅಭಿಲಾಷೆಗೆ ಬಾಲಕೃಷ್ಣ ಅವರ ಕುಟುಂಬ ಸದಸ್ಯರು ತಕರಾರು ಎತ್ತಿದ್ದರು. ಆಗ ವಿಷ್ಣು ಸೇನಾ ಸಮಿತಿ ಪ್ರತಿಭಟನೆ ನಡೆಸಿತ್ತು.

ಈ ವ್ಯಾಜ್ಯ ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಾಮಗಾರಿ ಮುಂದುವರಿಕೆಗೆ ತಡೆ ನೀಡಿತ್ತು.

ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಮೈಸೂರು ಜಿಲ್ಲಾಡಳಿತ ಹೈಕೋರ್ಟ್‌ ಮೆಟ್ಟಿಲೇರಿತ್ತು. ಏಪ್ರಿಲ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಅದರಿಂದ ಸ್ಮಾರಕ ನಿರ್ಮಾಣಕ್ಕಿದ್ದ ಕಾನೂನು ತೊಡಕು ಬಗೆಹರಿದಂತಾಗಿದೆ.