ಶಶಿರಾಜ್ ಶೆಟ್ಟಿ ಕೊಳಂಬೆ ಸಹಿತ ನೂರಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ..

Featured, ದಕ್ಷಿಣ ಕನ್ನಡ

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ಧಿ ಸಚಿವ ಡಾ| ಮಹೇಂದ್ರ ಸಿಂಗ್‌ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿಗೆ ಬರಮಾಡಿಕೊಂಡರು. ಪಕ್ಷದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ವಿವಿಧ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸಲಾರಂಭಿಸಿದೆ. ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತ ಹಲವು ಮಂದಿ ಬಿಜೆಪಿಯನ್ನು ಸೇರಿಕೊಳ್ಳುತ್ತಿದ್ದಾರೆ. ಬರುವ ಪ್ರತಿಯೊಬ್ಬರನ್ನು ಬಿಜೆಪಿ ಪ್ರೀತ್ಯಾಧಾರಗಳಿಂದ ನೋಡಿಕೊಳ್ಳಲಿದೆ ಎಂದರು.

ಬಂಟ್ವಾಳದಲ್ಲಿ ರಮಾನಾಥ ರೈ ಅವರು, ತಾನು ಬೆಳೆದದ್ದು ಬಿಟ್ಟರೆ ಬೇರೊಬ್ಬ ನಾಯಕನನ್ನು ಬೆಳೆಸಿಲ್ಲ. ಅಲ್ಪಸಂಖ್ಯಾಕರ ಪರ ವಹಿಸಿ ಮಾತನಾಡುವ ಅವರು ಆ ಸಮುದಾಯಕ್ಕೆ ಏನನ್ನೂ ಮಾಡಿಲ್ಲ. ಅಲ್ಪಸಂಖ್ಯಾಕ ನಾಯಕರನ್ನೂ ಬೆಳೆಸಲು ಸಾಧ್ಯವಾಗಿಲ್ಲ. ಇದರಿಂದ ಬೇಸತ್ತ ಅಲ್ಪ ಸಂಖ್ಯಾಕ ಮಂದಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಯತ್ತ ಬರುತ್ತಿದ್ದಾರೆ ಎಂದರು.

ಪುನರ್‌ ಪರಿಶೀಲಿಸುವ ವಿಶ್ವಾಸ
ಶಶಿರಾಜ್‌ ಶೆಟ್ಟಿ ಕೊಳಂಬೆ ಮಾತನಾಡಿ, ಕಾಂಗ್ರೆಸ್‌ನ ಸ್ವಜನ ಪಕ್ಷಪಾತಕ್ಕೆ ಬೇಸತ್ತು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ದೇಶ ಪ್ರೇಮ, ಧರ್ಮಪ್ರೇಮ ಹೊಂದಿರುವ ಬಿಜೆಪಿಯೊಂದಿಗೆ ಕೆಲಸ ಮಾಡುವುದರೊಂದಿಗೆ ಕಾಂಗ್ರೆಸ್‌ ಮುಕ್ತ ದಕ್ಷಿಣ ಕನ್ನಡ ಜಿಲ್ಲೆಗಾಗಿ ನಾನು ಪಣತೊಡುತ್ತಿದ್ದೇನೆ. ಬಿಜೆಪಿ ಸರಕಾರ ಆಡಳಿತಕ್ಕೆ ಬಂದಲ್ಲಿ ಎತ್ತಿನಹೊಳೆ ಯೋಜನೆಯನ್ನು ಪುನರ್‌ ಪರಿಶೀಲಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ರುಕ್ಮಯ ಪೂಜಾರಿ, ಸುಲೋಚನಾ ಜಿ.ಕೆ. ಭಟ್‌, ಹರಿಕೃಷ್ಣ ಬಂಟ್ವಾಳ್‌, ರವಿಶಂಕರ ಮಿಜಾರು, ಸುದರ್ಶನ ಮೂಡುಬಿದಿರೆ ಮುಂತಾದವರು ಉಪಸ್ಥಿತರಿದ್ದರು.