ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ, ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ: ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ದಾವಣಗೆರೆ ಉಸ್ತುವಾರಿ ಸಚಿವರಾಗಿದ್ದಾರೆ. ಬೇರೆ ಜಿಲ್ಲೆಯ ಶಾಸಕರನ್ನು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದು ಒತ್ತಾಯಿಸುತ್ತೇನೆ. ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ಇಂದು ನಡೆಯುವ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.