ಸಮ್ಮಿಶ್ರ ಸರಕಾರದ ವಿರುದ್ಧ ಹೋರಾಟಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ ರಣಕಹಳೆ ಹೊರಡಿಸಿದ ಬಿಜೆಪಿ
ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿರುವ ಬಿಜೆಪಿ ರೈತರ ಸಾಲಮನ್ನಾ, ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿಚಾರಗಳು ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ಈ ವಿಷಯವನ್ನು ಇಟ್ಟುಕೊಂಡು ರಾಜ್ಯದ್ಯಾಂತ ಬಿಜೆಪಿ ಹೋರಾಟಕ್ಕೆ ಸಿದ್ದವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲಲು ಇದು ಆಸರೆಯಾಗಲಿದೆ ಎಂಬ ಭರವಸೆಯನ್ನು ಕಮಲಪಾಳಯದ ನಾಯಕರು ಹೊಂದಿದ್ದಾರೆ.
ಈ ಎಲ್ಲಾ ವಿಷಯಗಳ ಕುರಿತು ಚರ್ಚೆ ನಡೆಸಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿಸಭೆ ನಡೆಸಿರುವ ನಾಯಕರು ಪಕ್ಷ ಸಂಘಟನೆ ಕುರಿತು ಹೆಚ್ಚಿನ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಜಿಂದಾಲ್ನಲ್ಲಿ ಐದು ದಿನಗಳ ಪ್ರಾಕೃತಿಕ ಚಿಕಿತ್ಸೆಗೆ ದಾಖಲಾಗಿರುವ ಯಡಿಯೂರಪ್ಪ ಸಭೆಗೆ ಆಗಮಿಸಿದ್ದು , ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಸಿ.ಎಂ.ಉದಾಸಿ, ನಳೀನ್ ಕುಮಾರ್ ಕಟೀಲ್ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದಾರೆ.
ಲೋಕಸಭಾ ಚುನಾವಣೆ ತಯಾರಿಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪಕ್ಷ ಬಲವರ್ಧನೆಗೆ ಸಜ್ಜಾಗುವಂತೆ ಸೂಚನೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲಿ ಅಸಮಾಧಾನಿತ ಕಾಂಗ್ರೆಸ್ -ಜೆಡಿಎಸ್ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಸಿದ್ದು, ಮೈತ್ರಿ ಸರ್ಕಾರದ ವಿರುದ್ಧ ಹೊರಾಟದ ರೂಪುರೇಷೆ ಕುರಿತು ಚರ್ಚೆ ನಡೆಸಿದೆ.
ರೈತರ ಸಂಪೂರ್ಣ ಸಾಲ ಮನ್ನಾ ಆಗ್ರಹಿಸಿ ರಾಜ್ಯ ಪ್ರವಾಸ, ರಾಜ್ಯಾದ್ಯಂತ ಹೋರಾಟಕ್ಕೆ ತಯಾರಿ ನಡೆಸಿದ್ದು, ಇದರ ಸಾರಥ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೊರಲು ಮುಖಂಡರು ಸಮ್ಮತಿ ಸೂಚಿಸಿದ್ದಾರೆ.
ಲೋಕಸಭಾ ಚುನಾವಣೆಗೆ ರೈತರ ಸಂಪೂರ್ಣ ಸಾಲ ಮನ್ನಾ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡು ರೈತರ ಪರವಾಗಿ ಹೋರಾಟದ ಮೂಲಕ ರೈತ ಸಮೂದಾಯ ಸೆಳೆಯಲು ಯೋಜನೆ ರೂಪಿಸಲಾಗಿದೆ.
