ಸಾಲ ಮನ್ನಾ ಮಾಡದಿದ್ದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಪಾಂಡವಪುರ: ‘ರೈತರ ಎಲ್ಲ ಬೇಡಿಕೆಗಳನ್ನು ಒಂದೇ ರಾತ್ರಿಯಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇನೆ. ಆದರೆ, ಮುಖ್ಯಮಂತ್ರಿಗೆ ಸಾಲ ಮನ್ನಾ ವಿಚಾರದಲ್ಲಿ ಸ್ಪಷ್ಟತೆ ಇಲ್ಲ ಎಂದು ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ಭತ್ತ ಕೊಯ್ಲು ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರಾತ್ರೋರಾತ್ರಿ ಸಂಪೂರ್ಣ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಏಳು ತಿಂಗಳಿಂದ ನಿರಂತರವಾಗಿ ಶ್ರಮಪಡುತ್ತಿದ್ದೇನೆ. ಆದರೆ ಸಾರ್ವಜನಿಕರು– ನನ್ನ ನಡುವೆ ಅಪನಂಬಿಕೆಯನ್ನು ಮಾಧ್ಯಮಗಳು ಸೃಷ್ಟಿಸುತ್ತಿವೆ. ಆ ಮೂಲಕ ರೈತರಲ್ಲಿ ಸಾಲ ಮನ್ನಾ ಆಗುವುದಿಲ್ಲ ಎಂಬ ಆತಂಕ ಸೃಷ್ಟಿಯಾಗಿದೆ. ಇದರಿಂದ ರೈತರ ಆತ್ಮಹತ್ಯೆಯೂ ಹೆಚ್ಚಾಗುತ್ತಿದೆ. ನನ್ನ ರೈತ ಬಂಧುಗಳು ಅಪಪ್ರಚಾರ ನಂಬಬಾರದು. ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಾಲ ಮನ್ನಾ ಮಾಡದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ’ ಎಂದರು.
‘ದೊಡ್ಡಬಳ್ಳಾಪುರ, ಸೇಡಂನಲ್ಲಿ ಶನಿವಾರ ಸಾಲ ಮನ್ನಾಕ್ಕೆ ಚಾಲನೆ ನೀಡಲಾಗುವುದು. ಸಾಲ ಮನ್ನಾ ಪ್ರಮಾಣ ಪತ್ರವನ್ನು ಅಧಿಕಾರಿಗಳು ಮನೆಗೆ ತಂದುಕೊಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ, ನನ್ನನ್ನು ನಂಬಿ’ ಎಂದು ಮನವಿ ಮಾಡಿದರು.
