ಹಸುಗಳ ಕೆಚ್ಚಲು ಕೊಯ್ದು ಪ್ರಕರಣ : ಓರ್ವ ಆರೋಪಿ ಬಂಧನ – vishwanews24
ಹಸುಗಳ ಕೆಚ್ಚಲು ಕೊಯ್ದು ಪ್ರಕರಣ : ಓರ್ವ ಆರೋಪಿ ಬಂಧನ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಓರ್ವ ಆರೋಪಿಯನ್ನು ಪೊಲೀಸರು ಭಾನುವಾರ ತಡರಾತ್ರಿ (ಜ.12) ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಭಾನುವಾರ ರಾತ್ರಿ ಕಾಟನ್ ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿರುವ ಸೈಯದ್ ನಸ್ರು (30) ಬಂಧಿತ ಆರೋಪಿ. ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಶೇಕ್ ನಸ್ರು ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಏನಿದು ಘಟನೆ?:
ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿತ್ತು.ಭಾನುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿತ್ತು.
ಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ದು, ಕಿಡಿಗೇಡಿಗಳು ಪರಾರಿ ಆಗಿದ್ದರು. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದರು.
ಈ ಸಂಬಂಧ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು, ಬಿಜೆಪಿ ಮುಖಂಡರು ಕ್ರಮಕ್ಕೆ ಆಗ್ರಹಿಸಿದ್ದರು.
