ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಇನ್ನಿಲ್ಲ – vishwanews24
ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಇನ್ನಿಲ್ಲ
ಚಿಕ್ಕಮಗಳೂರು: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
1936 ಆಗಸ್ಟ್ 26 ರಂದು ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದ ಚಂದ್ರೇಗೌಡ ಆಪ್ತ ವಲಯದಲ್ಲಿ ಡಿಬಿಸಿ ಎಂದೇ ಜನಾನುರಾಗಿಯಾಗಿದ್ದರು.
1971ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಅವರು, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗುವ ಮೂಲಕ ನಾಲ್ಕೂ ಸದನಗಳಲ್ಲಿ ಸದಸ್ಯರಾಗಿದ್ದರು.
2014ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ಅವರು, ದಾರದಹಳ್ಳಿಯ ತಮ್ಮ ‘ಪೂರ್ಣಚಂದ್ರ’ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಪತ್ನಿ ಪೂರ್ಣಿಮಾ ಹಾಗೂ ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ನಾಳೆ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
