ಹೆದ್ದಾರಿಯಲ್ಲಿ ಮಳೆ ನೀರು ನಿಂತು ಟ್ರಾಫಿಕ್ ಜಾಮ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ‌ ಕಾರು ತಡೆದು ಆಕ್ರೋಷ -Vishwanews24

Featured, ಉಡುಪಿ

ಕುಂದಾಪುರ: ಕುಂದಾಪುರ ಬಸ್ರೂರು ಮೂರುಕೈನಿಂದ ವಿನಾಯಕ-ಕೋಡಿ ಜಂಕ್ಷನ್ ವರೆಗೆ ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಶುಕ್ರವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃತಕ ಕೆರೆ ಸೃಷ್ಟಿಯಾಗಿದೆ.

ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಂಡ-ಗುಂಡಿಗಳು ನಿರ್ಮಾಣಗೊಂಡು ಶನಿವಾರ ಬೆಳಿಗ್ಗೆನಿಂದ ಕಿಲೋಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮೀನುಗಾರಿಕಾ ಇಲಾಖೆಯ ಕಾರ್ಯಕ್ರಮದ ಸಲುವಾಗಿ ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರಕ್ಕೆ ಆಗಮಿಸಿದ್ದು ಕಾರ್ಯಕ್ರಮ ಮುಗಿಸಿ ವಾಪಾಸ್ ಮಂಗಳೂರಿನತ್ತ ತೆರಳುವಾಗ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯವರು ಕೃತಕ ಕೆರೆ ಸೃಷ್ಟಿಯಾದ ಸ್ಥಳದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ತಡೆದು ಆಕ್ರೋಷ ವ್ಯಕ್ತಪಡಿಸಿದರು. ಹೆದ್ದಾರಿ‌ಕಾಮಗಾರಿ ಆರಂಭದ ದಿನದಿಂದಲೂ ಇಲ್ಲಿ ಇದೇ ಸಮಸ್ಯೆ ಉಂಟಾಗುತ್ತಿದ್ದು ಸಮಸ್ಯೆ ಶೀಘ್ರ ಪರಿಹರಿಸುವಂತೆ ಹೋರಾಟ ಸಮಿತಿಯವರು ಹಾಗೂ ಸ್ಥಳೀಯರು‌ ಸಚಿವರನ್ನು ಒತ್ತಾಯಿಸಿದರು. ಈ ವೇಳೆ ಸಚಿವರು ಮತ್ತು ಹೋರಾಟ ಸಮಿತಿ ಪದಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಸ್ಥಳದಲ್ಲೇ ಡಿಸಿಯವರ ಬಳಿ ಮಾತನಾಡಿದ ಸಚಿವರು ಶೀಘ್ರ ಸಮಸ್ಯೆ ಬಗೆಹರಿಸಲು ಸೂಚಿಸಿದರು. ಈ ಸಂದರ್ಭ ಮಾತನಾಡಿದ ಸಚಿವ ಕೋಟ, ಡಿಸಿ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂದಪಟ್ಟವರಿಗೆ ಮಾತನಾಡಿ ಸಮಸ್ಯೆ ಪರಿಹಾರಿಸಲು ಸೂಚಿಸಿದ್ದೇನೆ ಎಂದರು.

ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಕಿಶೋರ್ ಕುಮಾರ್ ಕುಂದಾಪುರ, ರಾಜೇಶ್ ಕಾವೇರಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಶಶಿಧರ ಹೆಮ್ಮಾಡಿ, ಗಣೇಶ್, ಸ್ಥಳೀಯ ಆಟೋ ಚಾಲಕರು, ಅಂಗಡಿ ಮಾಲಿಕರು ಉಪಸ್ಥಿತರಿದ್ದರು.